ಬೈಂದೂರು, ಜು 07 (DaijiworldNews/HR): ಕುಂದಾಪುರ, ಬೈಂದೂರು ಭಾಗಗಳಲ್ಲಿ 200 ಮಿ.ಮೀ ಅಧಿಕ ಮಳೆಯಾಗಿದ್ದು ಬೈಂದೂರಿನ ಕಡಲ ತೀರದ ಪ್ರದೇಶಗಳು, ನಾವುಂದ, ಮರವಂತೆ, ನಾಡ, ಅಂಪಾರು, ಸಿದ್ದಾಪುರ ಗಂಗೊಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಿಂದ ಅತಿ ಹೆಚ್ಚು ಹಾನಿಯಾಗಿದ್ದು ಈ ಪ್ರದೇಶಗಳಿಗೆ ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮರವಂತೆ ಹೊರಬಂದರು ಪ್ರದೇಶದ ಸಮೀಪ ಕಡಲ್ಕೊರೆತದಿಂದ ವ್ಯಾಪಕ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಂಸದರು ಕಡಲ್ಕೊರೆತಕ್ಕೆ ಕಲ್ಲಿನಿಂದ ತಡೆಗೋಡೆ ನಿರ್ಮಿಸಿದರೆ ಸಮಸ್ಯೆ ಪರಿಹಾರ ಆಗುವುದಿಲ್ಲ. ಹಾಗಾಗಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಂಸತ್ತಿನ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಲಾಗುವುದು. ಶಾಸಕರ ಜೊತೆಗೂಡಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಜನರ ಸಮಸ್ಯೆಯ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದರು.
ಕಾಮಗಾರಿಯಲ್ಲಿ ಹಣ ದುರುಪಯೋಗವಾದರೆ ಈ ಕುರಿತು ಸೂಕ್ತ ತನಿಖೆ ನಡೆಯಬೇಕು. ರಾಜ್ಯ ಸರ್ಕಾರದ ವತಿಯಿಂದ ಮರವಂತೆ ಭಾಗದ ವಿವಿಧ ಅಭಿವೃದ್ಧಿಗೆ ಈಗಾಗಲೇ 84 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ ಎಂದರು.
ಪ್ರಕೃತಿಯ ಮುಂದೆ ಯಾರು ಕೂಡ ದೊಡ್ಡವರಲ್ಲ, ತಂತ್ರಜ್ಞಾನ ಉಪಯೋಗಿಸಿಕೊಂಡು ಕಡಲ್ಕೊರತ ತಡೆಗೆ ಯೋಜನೆಗಳನ್ನು ರೂಪಿಸಬೇಕು. ಬೈಂದೂರು ಕ್ಷೇತ್ರದಲ್ಲಿ ಮಳೆಯಿಂದ ಸಮಸ್ಯೆ ಅನುಭವಿಸುತ್ತಿರುವ ಜನರ ತೊಂದರೆಗಳಿಗೆ ಶಾಶ್ವತ ಪರಿಹಾರ ಕೊಡಲಾಗುವುದು ಎಂದು ಸಂಸದರು ಹೇಳಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮ ರಾವ್, ಸಿಇಓ ಪ್ರಸನ್ನ , ಮಂಡಳದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಉಪಸ್ಥಿತರಿದ್ದರು.