ಮಂಗಳೂರು, ಜು 08 (DaijiworldNews/SM): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ವೀರರ ಹೆಸರಿನಲ್ಲಿ ಸೈನಿಕ ತರಬೇತಿ ಸಂಸ್ಥೆಗಳನ್ನು ಆರಂಭಿಸಲಾಗುವುದು. ಇದು ಅಗ್ನಿಪಥ ಯೋಜನೆಗೆ ಪೂರಕವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ನ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸರ್ಕಾರಿ ನೌಕರಿಯ ಬಗ್ಗೆ ಕರಾವಳಿ ಜನರಿಗೆ ಹೆಚ್ಚಿನ ಮಾಹಿತಿ, ತರಬೇತಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಅವರು, ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಹೊಸ ಸ್ಪರ್ಷ ನೀಡಲಾಗುತ್ತಿದೆ. ಇಲಾಖೆಯ 1704 ವಸತಿ ಶಾಲೆಗಳಲ್ಲಿ 1.8 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಸರ್ಕಾರ 6 ನೇ ತರಗತಿ ನಂತರದ ಮಕ್ಕಳಿಗೆ ಆತ್ಮರಕ್ಷಣೆಗೆ ಒನಕೆ ಓಬವ್ವ ಹೆಸರಿನಲ್ಲಿ ಕರಾಟೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಇದರಿಂದ ಕರಾಟೆ ಕಲಿತ ಹೆಣ್ಣುಮಕ್ಕಳಿಗೆ ಉದ್ಯೋಗವೂ ದೊರೆಯಲಿದೆ ಎಂದರು.