ಬೆಂಗಳೂರು, ಎ.15 (DaijiworldNews/PY): ತಮಗೆ ಬೆಂಬಲ ನೀಡುವಂತೆ ಸಾರಿಗೆ ನೌಕರರು ನಟ ಯಶ್ ಅವರಿಗೆ ಬರೆದ ಪತ್ರಕ್ಕೆ ಯಶ್ ಉತ್ತರ ನೀಡಿದ್ದಾರೆ.
ಈ ಬಗ್ಗೆ ಪತ್ರ ಬರೆದಿರುವ ಯಶ್, "ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಪ್ರೀತಿಯ ಸಾರಿಗೆ ಸಂಸ್ಥೆ ನೌಕರರ ಕುಟುಂಬಕ್ಕೆ ನಿಮ್ಮ ಯಶ್ ಮಾಡುವ ನಮಸ್ಕಾರಗಳು. ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ" ಎಂದು ತಿಳಿಸಿದ್ದಾರೆ.
"ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ. ಆಫೀಸ್ ಗೆ ಲೇಟ್ ಆಗುತ್ತೇನೋ. ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ. ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ. ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ" ಎಂದಿದ್ದಾರೆ.
"ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು. ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ" ಎಂದು ಹೇಳಿದ್ದಾರೆ.
"ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ. ಸಮಾಧಾನದ ವಿಷಯ ಅಂದ್ರೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಟ್ಟಿದೆ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
"ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ" ಎಂದು ತಿಳಿಸಿದ್ದಾರೆ.