ಬೆಂಗಳೂರು, ಫೆ 11 (DaijiworldNews/MS): 'ಮಂಗಳೂರಿನ ಪಚ್ಚನಾಡಿ ಕಸ ಸುರಿಯುವ ಸ್ಥಳದಲ್ಲಿ ಸುದೀರ್ಘ ಕಾಲದಿಂದ ಸಂಗ್ರಹವಾಗಿರುವ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ನಾನಾ ಸಬೂಬುಗಳನ್ನು ಹೇಳಿಕೊಂಡು ಕಾಲದೂಡಿತ್ತಿರುವುದಕ್ಕೆ ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ಹೈಕೋರ್ಟ್, ʼಈಗಿರುವುದು ಅತ್ಯಂತ ಸಂವೇದನಾರಹಿತ ಸರ್ಕಾರ, ಸರ್ಕಾರಕ್ಕೆ ಛೀಮಾರಿ ಹಾಕುತ್ತೇವೆ' ಎಂದು ಮೌಖಿಕವಾಗಿ ಚಾಟಿ ಬೀಸಿತು.
ಮಂಗಳೂರಿನ ಪಚ್ಚನಾಡಿ ಪ್ರದೇಶ ಮತ್ತು ಮರವೂರ ಜಲಾಶಯದ ವ್ಯಾಪ್ತಿಯಲ್ಲಿ ಕುಡಿಯುವ ನೀರು ಕಲುಷಿತವಾಗಿರುವುದರಿಂದ 13 ಗ್ರಾಮಗಳ ಜನರಿಗೆ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂದು ಆಕ್ಷೇಪಿಸಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುತಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
“ಮಾಲಿನ್ಯಕ್ಕೆ ಎಡೆಮಾಡಿಕೊಡುತ್ತಿರುವ ಮಂಗಳೂರಿನ ಪಚ್ಚನಾಡಿ ಕಸ ಸುರಿಯುವ ಸ್ಥಳದಲ್ಲಿ ಸುದೀರ್ಘ ಕಾಲದಿಂದ ಸಂಗ್ರಹವಾಗಿರುವ ತ್ಯಾಜ್ಯ ವಿಲೇವಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಪ್ರತಿವಾದಿಗಳು ನಡೆದುಕೊಳ್ಳುತ್ತಿರುವ ರೀತಿಯು ಅತ್ಯಂತ ಆಘಾತ ಉಂಟು ಮಾಡುವಂತಿದೆ” ಎಂದು ಪೀಠವು ಆದೇಶದಲ್ಲಿ ದಾಖಲಿಸಿದೆ.