ಬೆಂಗಳೂರು, ಮಾ 11 (DaijiworldNews/DB): ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಯಾವುದೇ ಆಸೆ ನನಗಿಲ್ಲ, ಮುಂದಿನ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಅವರು, ನಾನು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದೇನೆಯೇ ಹೊರತು, ಮುಖ್ಯಮಂತ್ರಿ ಹುದ್ದೆಯಿಂದ ಯಾರೂ ತೆಗೆದು ಹಾಕಿಲ್ಲ. ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಆಸೆಯೂ ನನಗಿಲ್ಲ ಎಂದರು.
ಬೊಮ್ಮಾಯಿ ಅವರು ಜನಪರ ಬಜೆಟ್ ಮಂಡಿಸಿದ್ದಾರೆ. ಅದನ್ನೇ ಹಿಡಿದುಕೊಂಡು ನಾವು ಜನರ ಬಳಿಗೆ ಹೋಗುತ್ತೇವೆ. ನೀವೂ ಬನ್ನಿ, ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡೋಣ ಎಂದು ಸವಾಲು ಹಾಕಿದರು.
ರಾಜ್ಯದಲ್ಲೂ ಕಾಂಗ್ರೆಸ್ ಧೂಳೀಪಟವಾಗಲಿದೆ. ಸಿದ್ಧರಾಮಯ್ಯ ಅವರು ಮತ್ತೆ ವಿಪಕ್ಷ ನಾಯಕರಾದರೆ ಕಾಂಗ್ರೆಸ್ ಸೋಲು ಖಚಿತ ಎಂದು ಇದೇ ವೇಳೆ ಅವರು ತಿಳಿಸಿದರು.