ನವದೆಹಲಿ, ಮಾ 11 (DaijiworldNews/DB): ರಷ್ಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ರಷ್ಯಾ ತೊರೆಯಬೇಕಾಗಿಲ್ಲ. ನಿರಾತಂಕವಾಗಿ ಅಲ್ಲಿ ಇರಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ರಷ್ಯಾ-ಉಕ್ರೇನ್ ಯುದ್ಧದ ನಡುವೆ ದೇಶದಲ್ಲಿ ತಮ್ಮ ವಾಸ್ತವ್ಯದ ಬಗ್ಗೆ ಸಲಹೆ ಕೋರಿ, ರಷ್ಯಾದ ವಿಶ್ವವಿದ್ಯಾಲಯಗಳಲ್ಲಿನ ಭಾರತೀಯ ವಿದ್ಯಾರ್ಥಿಗಳು ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಆದರೆ ರಷ್ಯಾ ತೊರೆಯಲು ಯಾವುದೇ ಭದ್ರತಾ ಕಾರಣವಿಲ್ಲ. ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ಸೇರಿದಂತೆ ರಷ್ಯಾದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳ ಸುರಕ್ಷತೆಗೆ ಸಂಬಂಧಿಸಿದಂತೆ ನಿರಂತರವಾಗಿ ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕ ಕಾಯ್ದುಕೊಳ್ಳಲಾಗಿದೆ ಎಂದು ಕಚೇರಿ ಪ್ರತಿಕ್ರಿಯೆ ನೀಡಿದೆ.