ಬೆಂಗಳೂರು, ಮಾ 16 (DaijiworldNews/DB): ಪಂಜಾಬ್ ಹೊರತುಪಡಿಸಿ ಉಳಿದ ನಾಲ್ಕೂ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಗೆ ಲಾಭವಾಗಿದೆ. ಹೀಗಾಗಿ ಪಂಚರಾಜ್ಯ ಚುನಾವಣೆಯಲ್ಲಿ ಸೋತ ಕಾರಣಕ್ಕೆ ಕಾಂಗ್ರೆಸ್ ಭವಿಷ್ಯವೇ ಮುಗಿದು ಹೋಯಿತು ಎಂದು ಭಾವಿಸಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ನಿರ್ದೇಶಕ ಎಸ್. ನಾರಾಯಣ್ ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಮಾಜಿ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋವಾದಲ್ಲಿ ಹಿಂದಿನ ಚುನಾವಣೆಯಲ್ಲಿ 2 ಸ್ಥಾನ ಗೆದ್ದ ನಾವು ಈ ಬಾರಿ 10ಕ್ಕೂ ಹೆಚ್ಚು ಸ್ಥಾನ ಪಡೆದುಕೊಂಡಿದ್ದೇವೆ. ಉಳಿದ ಮೂರು ರಾಜ್ಯಗಳಲ್ಲಿಯೂ ಉತ್ತಮ ಸ್ಥಾನ ಸಿಕ್ಕಿದೆ. ಆದರೆ ಬಿಜೆಪಿಯವರು ಕಾಂಗ್ರೆಸ್ ಕಥೆ ಮುಗಿಯಿತು ಎನ್ನುತ್ತಿರುವುದು ದುರದೃಷ್ಟಕರ ಎಂದರು.
ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ವಿವಿಧೆಡೆ ಬಿಜೆಪಿಗೆ ಜನ ಅವಕಾಶ ಕೊಟ್ಟಿಲ್ಲ. ಕರ್ನಾಟಕದಲ್ಲಿಯೂ ಮುಂದೆ ಅವಕಾಶ ನೀಡುವುದಿಲ್ಲ. 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.
ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಸುಮಾರು 50 ಲಕ್ಷ ನಿಷ್ಠಾವಂತ ಕಾರ್ಯಕರ್ತರನ್ನು ನೋಂದಣಿ ಮಾಡಿಕೊಳ್ಳುವ ಗುರಿ ಇದೆ. ಈವರೆಗೂ 15 ಲಕ್ಷ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ತಿಂಗಳ 31ರವರೆಗೂ ಕಾಲಾವಕಾಶವಿದ್ದು, ಗುರಿ ತಲುಪುವ ವಿಶ್ವಾಸವಿದೆ ಎಂದವರು ತಿಳಿಸಿದರು.
ಎಸ್.ನಾರಾಯಣ್, ತಿಮ್ಮಯ್ಯ ಪುರ್ಲೆ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ನಮಗೆ ಆನೆ ಬಲ ಬಂದಂತಾಗಿದೆ. ಕಾಂಗ್ರೆಸ್ ಸೇರ್ಪಡೆಗೆ ಇನ್ನೂ ಹಲವರು ಮುಂದೆ ಬಂದಿದ್ದು, ಸದ್ಯ ಹೆಸರು ಬಹಿರಂಗ ಪಡಿಸಲು ಇಚ್ಛಿಸುವುದಿಲ್ಲಎಂದ ಅವರು, ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ನಿಜವೇ ಆಗಿದ್ದರೆ ಬೇಗನೇ ಸೇರಿಸಿಕೊಳ್ಳಲಿ. ಸುಮ್ಮನೆ ಕಾಲಹರಣ ಮಾಡಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದರು.