ಬೆಂಗಳೂರು, ಮಾ. 24 (DaijiworldNews/SM): ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವೇಗ ನೀಡಿದೆ. ಹಾಗೂ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯ ಖಂಡಿಸಿ ಕರ್ನಾಟಕ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಈ ಖಂಡನಾ ನಿರ್ಣಯವನ್ನು ಮಂಡಿಸಿದ್ದರು. ಸದನ ಸರ್ವಾನುಮತದಿಂದ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ. ನದಿ ಜೋಡಣೆಯ ಡಿಪಿಆರ್ ಅನ್ನು ಕರ್ನಾಟಕ ಸರ್ಕಾರ ಒಪ್ಪುವವರೆಗೆ ಅನುಮೋದಿಸದಂತೆ ಎಂಬ ತಿದ್ದುಪಡಿಯೊಂದಿಗೆ ನಿರ್ಣಯವು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಮತ್ತೊಂದೆಡೆ ಕೇಂದ್ರ ಸರಕಾರ ತಕ್ಷಣ ಇದಕ್ಕೆ ಅನುಮೋದನೆ ನೀಡುವಂತೆ ಆಗ್ರಹಿಸಲಾಯಿತು.
ಗೋದಾವರಿ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೆ-ಗುಂಡಾರ್ ಜೋಡಣೆ ಯೋಜನೆಯನ್ನು ಅಂತಿಮಗೊಳಿಸಬಾರದು, ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ತಮಿಳುನಾಡಿನ ನಿರ್ಣಯ ಅಂಗೀಕರಿಸಬಾರದು ಎಂದು ನಿರ್ಣಯ ಕೈಗೊಳ್ಳಲಾಯಿತು.