ಬಳ್ಳಾರಿ, ಮಾ 27 (DaijiworldNews/HR): ಹಿಜಾಬ್ ವಿಚಾರವಾಗಿ ಹೇಳಿಕೆ ನೀಡಿರುವ ಸಿದ್ದರಾಮಯ್ಯವರನ್ನು ನೆನೆಸಿಕೊಂಡರೆ ನೋವಾಗುತ್ತದೆ. ಅವರ ಸ್ಥಿತಿ ತುಘಲಕ್ ರೀತಿಯಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಅವರ ನಾಲಿಗೆ, ಮಾತಿನ ಮೇಲೆ ಹಿಡಿತವಿಲ್ಲ. ಗುರುಪರಂಪರೆಗೆ ಅವಮಾನ ಮಾಡಿದ್ದಾರೆ. ಮೊದಲು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರ ಆತ್ಮವಿಶ್ವಾಸ ಕಡಿಮೆಯಾಗಿದ್ದು, ಪಕ್ಷದಲ್ಲಿ ಏಕಾಂಗಿಯಾಗಿದ್ದಾರೆ. ಅವರು ಖಿನ್ನತೆಯಲ್ಲಿದ್ದಂತೆ ಕಾಣುತ್ತಿದೆ. ಕಾಂಗ್ರೆಸ್ ಪಕ್ಷದ ವ್ಯವಸ್ಥೆಯೇ 2-3 ತುಂಡುಗಳಾಗಿದ್ದು, ಒಟ್ಟಾಗಿ ಕಾಂಗ್ರೆಸ್ ಪಕ್ಷದ ಸ್ಥಿತಿಯೇ ಗೊಂದಲದಲ್ಲಿದೆ ಎಂದು ಟೀಕಿಸಿದ್ದಾರೆ.