ಬೆಂಗಳೂರು, ಏ 10 DaijiworldNews/HR): ಸರ್ವ ಜನಾಂಗದ ತೋಟಕ್ಕೆ ಸಮಾಧಿ ಕಟ್ಟುವ ಕೆಲಸವನ್ನು ಬಿಜೆಪಿ ಸರಕಾರ ಮಾಡುತ್ತಿದೆಯಾ? ಎಂಬ ಸಂಶಯ ನನ್ನದು. ಮೌನಂ ಸಮ್ಮತಿ ಲಕ್ಷಣಂ ಎನ್ನುವಂತೆ ಸಿಎಂ ಬಸವರಾಜ ಬೊಮ್ಮಾಯಿ, ಬಾಯಿಗೆ ಬೀಗ ಹಾಕಿಕೊಂಡು, ಸತ್ತ ಸರಕಾರಕ್ಕೆ ನಾನೇ ಸಾಹುಕಾರ ಎನ್ನುವಂತೆ ಬೆಂಕಿ ನಡುವೆ ಪಿಟೀಲು ಬಾರಿಸುತ್ತಿದ್ದ ನೀರೋ ದೊರೆಯನ್ನು ಮೀರಿಸುತ್ತಿದ್ದಾರೆ ಎಂದು ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ಅಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಕಿಡಿಗೇಡಿಗಳು ಮುಸ್ಲಿಮರ ಅಂಗಡಿಗಳ ದಾಳಿ ನಡೆಸಿ ಅಪಾರ ಪ್ರಮಾಣದ ಕಲ್ಲಂಗಡಿಯನ್ನು ರಸ್ತೆಗೆಸೆದು ಹಾಳು ಮಾಡಿದ ಘಟನೆಯ ಕುರಿತು ಟ್ವೀಟ್ ಮಾಡಿರುವ ಅವರು, ಕಾಶ್ಮೀರದಲ್ಲಿ ರಕ್ತದೋಕುಳಿ ಹರಿಸುವ ಭಯಾತ್ಪಾದಕರಿಗೂ, ಶಾಂತಿ-ಸೌಹಾರ್ದತೆಗೆ ಕಿಚ್ಚಿಡುತ್ತಿರುವ ಈ ಕಿರಾತಕರಿಗೂ ವ್ಯತ್ಯಾಸವೇ ಇಲ್ಲ. ತಿನ್ನುವ ಅನ್ನಕ್ಕೆ ಮಣ್ಣುಹಾಕಿ ಬದುಕಿಗೆ ಬೆಂಕಿ ಇಡುವ ಇಂಥ ಪ್ರವೃತ್ತಿ ಅನಾಗರಿಕ-ಅಸಹ್ಯ. ಕರ್ನಾಟಕವನ್ನು ಈ ದುಷ್ಟರು, ಶಿಲಾಯುಗದತ್ತ ಹಿಮ್ಮೆಟ್ಟಿಸುತ್ತಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.
ಇನ್ನು ಈ ರಕ್ಕಸರು ಕಲ್ಲಂಗಡಿಯನ್ನು ರಸ್ತೆಗೆಸೆದು ನಾಶ ಮಾಡಿದ ಪರಿಯನ್ನು ಗಮಿನಿಸಿದರೆ ಸಾಕು; ಇವರ ರಾಕ್ಷಸ ಪ್ರವೃತ್ತಿ ಉಗ್ರರಿಗಿಂತ ಕಮ್ಮಿಯೇನಲ್ಲ. ಅನ್ನವನ್ನೇ ಹಾಳುಗೆಡವಿದ ಈ ನೀಚರಿಗೆ ತಕ್ಕ ಪಾಠ ಕಲಿಸಲೇಬೇಕು. ಇವರ ವಿರುದ್ಧ ಸರಕಾರವು ಕೂಡಲೇ ಭಯೋತ್ಪಾದನೆ ವಿರುದ್ಧದ ಕಾಯ್ದೆ ಅಡಿ ಕೇಸು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ನನ್ನ ಪ್ರಕಾರ ಇವರು ಹಿಂದೂಗಳೇ ಅಲ್ಲ, ಮನಷ್ಯರೂ ಅಲ್ಲ. ಧರ್ಮಾಂದತೆಯ ಮತ್ತಿನಲ್ಲಿ ತೇಲುತ್ತಿರುವ ಕ್ರೂರ ಮೃಗಗಳು. ಅಂಗಡಿಗಳನ್ನು ನಾಶಪಡಿಸಿ, ಕಲ್ಲಂಗಡಿಯನ್ನು ಹಾಳುಗೆಡವಿದ ಎಲ್ಲ ಕಿರಾತಕರ ವಿರುದ್ಧ ಸರಕಾರ ಕೂಡಲೇ ಕ್ರಿಮಿನಲ್ ಕೇಸು ದಾಖಲಿಸಬೇಕು, ರಾಜ್ಯದಿಂದಲೇ ಗಡೀಪಾರು ಮಾಡಬೇಕು. ಇದು ನನ್ನ ಆಗ್ರಹ ಎಂದು ಹೇಳಿದ್ದಾರೆ.