ದೇವಘರ್, ಏ 12 (DaijiworldNews/DB): ಜಾರ್ಖಂಡ್ನ ದೇವಘರ್ನಲ್ಲಿ ಕೇಬಲ್ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣಾ ಕಾರ್ಯಾಚರಣೆಯ ವೇಳೆ ಹೆಲಿಕಾಪ್ಟರ್ನೊಳಗೆ ಎಳೆಯುವಾಗ ಮತ್ತೊಬ್ಬ ವ್ಯಕ್ತಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.
ಶೋಭಾ ದೇವಿ (60) ಮೃತಪಟ್ಟವರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಸಾವನ್ನಪ್ಪಿದ್ದರು. ಸೋಮವಾರ ಮತ್ತು ಮಂಗಳವಾರ ಮತ್ತಿಬ್ಬರು ಮೃತಪಟ್ಟಿದ್ದರು.
ಇಲ್ಲಿನ ತ್ರಿಕೂಟ ಬೆಟ್ಟಗಳ ವಲಯದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಕೇಬಲ್ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಕೇಬಲ್ ಕಾರುಗಳ ನಡುವೆ ಸಿಲುಕಿದ್ದ ಎಲ್ಲ ಪ್ರವಾಸಿಗರನ್ನು ಮಂಗಳವಾರ ರಕ್ಷಿಸಲಾಗಿದೆ. ಆದರೆ, ರಕ್ಷಣಾ ಕಾರ್ಯಾಚರಣೆಯ ವೇಳೆ ಹೆಲಿಕಾಪ್ಟರ್ನೊಳಗೆ ಎಳೆಯುವಾಗ ಈವರೆಗೆ ಮೂರು ಮಂದಿ ಆಯತಪ್ಪಿ ಕೆಳಕ್ಕೆ ಬಿದ್ದು ಜೀವ ಕಳೆದುಕೊಂಡಿದ್ದಾರೆ. ರಕ್ಷಣೆ ಪಡೆದಿರುವ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಕೆ. ಮಲ್ಲಿಕ್ ತಿಳಿಸಿದ್ದಾರೆ.
ಒಟ್ಟು 60ಕ್ಕೂ ಹೆಚ್ಚು ಜನರನ್ನು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್ಗಳನ್ನು ಬಳಸಿ ರಕ್ಷಣೆ ಮಾಡಲಾಗಿದೆ. 12 ಮಂದಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತೀಯ ವಾಯುಪಡೆ, ಸೇನೆ, ಐಟಿಬಿಪಿ, ಎನ್ಡಿಆರ್ಎಫ್ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಜನರನ್ನು ಸುರಕ್ಷಿತವಾಗಿ ಕರೆ ತಂದಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.