ಬೆಂಗಳೂರು, ಏ 13 (DaijiworldNews/HR): ವರ್ತೂರು ಠಾಣೆ ವ್ಯಾಪ್ತಿಯಲ್ಲಿಅವಿವಾಹಿತ ಮಹಿಳೆಯನ್ನು ಮೂವರು ಪರಿಚಯಸ್ಥರೇ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕೊಲೆಯಾದ ಮಹಿಳೆಯನ್ನು ಮಲ್ಲೇಶ್ವರಂ ನಿವಾಸಿ ಸುನೀತಾ ರಾಮಪ್ರಸಾದ್ (55) ಎಂದು ಗುರುತಿಸಲಾಗಿದೆ.
ಆರೋಪಿಗಳಾದ ಗೋವಿಂದಪುರ ನಿವಾಸಿಗಳಾದ ಇಮ್ರಾನ್ (32) ಮತ್ತು ವೆಂಕಟೇಶ್ (30) ಎಂಬುವವರನ್ನು ಬಂಧಿಸಲಾಗಿದ್ದು, ಮತ್ತೂಬ್ಬ ಪ್ರಮುಖ ಆರೋಪಿ ಕಿರಣ್ (25) ಎಂಬಾತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುನೀತಾ ರಾಮ್ಪ್ರಸಾದ್ ಅವಿವಾಹಿತರಾಗಿದ್ದು, ಅವರ ಸಹೋದರರು ವಿದೇಶದಲ್ಲಿದ್ದು, ತಂದೆ ಮೈಸೂರಿನಲ್ಲಿದ್ದಾರೆ. ಹೀಗಾಗಿ ಮಲ್ಲೇಶ್ವರಂನಲ್ಲಿ ಸಂಬಂಧಿಯೊಬ್ಬರ ಜತೆ ವಾಸವಾಗಿದ್ದರು.
ಇನ್ನು ಸುನೀತಾಗೆ ಕಿರಣ್ ಪರಿಚಯವಾಗಿದ್ದು, ಸುನೀತಾಗೆ ನಡೆಯಲು ಕಷ್ಟವಾಗುತ್ತಿದ್ದರಿಂದ ಎಲ್ಲಿಗಾದರೂ ಹೋಗಬೇಕಾದರೆ ಕಿರಣ್, ಇಮ್ರಾನ್ ಹಾಗೂ ವೆಂಕಟೇಶ್ ಸಹಾಯ ಪಡೆದುಕೊಳ್ಳುತ್ತಿದ್ದರು. ಸುನೀತಾ ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರಿಂದ ಹೆಚ್ಚಿನ ಹಣ ಇರಬಹುದೆಂದು ಆರೋಪಿಗಳು ತಿಳಿದುಕೊಂಡು ಕೊಲೆಗೈದಿದ್ದಾರೆ ಎಂಬ ಅನುಮಾನವಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಕಿರಣ್ ತಾನೂ ವಾಸವಾಗಿರುವ ಅಪಾರ್ಟ್ಮೆಂಟ್ ಮಾಲೀಕರಿಗೆ ನಾಲ್ಕನೇ ಮಹಡಿ ಯಲ್ಲಿ ಖಾಲಿ ಇರುವ ಮನೆಗೆ ತಮ್ಮ ಪರಿಚಯಸ್ಥರೊಬ್ಬರು ಬಾಡಿಗೆಗೆ ಬರುತ್ತಾರೆ ಎಂದು ನಾಲ್ಕು ದಿನಗಳ ಹಿಂದೆಯೇ ಕೀ ಪಡೆದುಕೊಂಡಿದ್ದು, ಏ.1ರಂದು ಸುನೀತಾರನ್ನು ಮೂವರು ಆರೋಪಿಗಳು ನಾಲ್ಕನೇ ಮಹಡಿಯ ಮನೆಗೆ ಕರೆದೊಯ್ದಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಏ.5ರಂದು ಅಕ್ಕ-ಪಕ್ಕದ ನಿವಾಸಿಗಳಿಗೆ ಕೊಳೆತ ವಾಸನೆ ಬರುತ್ತಿದ್ದು, ಅಪಾರ್ಟ್ಮೆಂಟ್ ಮಾಲೀಕರಿಗೆ ದೂರು ನೀಡಿದ್ದರು. ಮನೆ ಕೀ ಕಿರಣ್ ಬಳಿಯಿದ್ದರಿಂದ ಆತನ ಮನೆಗೆ ಬಂದಾಗ ಆರೋಪಿ ಇರಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ವರ್ತೂರು ಠಾಣೆ ಪೊಲೀಸರು ಬಾಗಿಲು ಮುರಿದು ಒಳ ಹೋಗಿ ನೋಡಿದಾಗ, ಮಧ್ಯದ ಕೋಣೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸುನೀತಾ ಶವಪತ್ತೆಯಾಗಿತ್ತು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಸುನೀತಾರ ಮೊಬೈಲ್ ನೆಟ್ವರ್ಕ್ ಮತ್ತು ಮೊಬೈಲ್ ಸಿಡಿಆರ್ ಹಾಗೂ ಅಪಾರ್ಟ್ಮೆಂಟ್ನ ಸಿಸಿ ಕ್ಯಾಮೆರಾ ಆಧರಿಸಿ ವೆಂಕಟೇಶ್ ಮತ್ತು ಇಮ್ರಾನ್ ಬಂಧಿಸಲಾಗಿದೆ.