ಮೈಸೂರು, ಏ 13 (DaijiworldNews/DB): ಅನರ್ಹರು ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದರೆ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ನ್ನು ಅರ್ಹರಿಗೆ, ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ನೀಡಲಾಗುತ್ತದೆ. ಒಂದು ವೇಳೆ ಅಕ್ರಮವಾಗಿ ಕಾರ್ಡ್ ಪಡೆದುಕೊಂಡು ಅರ್ಹರಿಗೆ ಸಿಗಬೇಕಾದ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡರೆ ಅಂತಹವರ ವಿರುದ್ಧ ಕ್ರಮ ವಹಿಸುವುದು ಅನಿವಾರ್ಯವಾಗುತ್ತದೆ ಎಂದರು.
ಬಿಪಿಎಲ್ ಕಾರ್ಡ್ ಪಡೆಯಲು ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕಾರ್ಡ್ ಒದಗಿಸಲಾಗುವುದು. ಈಗಾಗಲೇ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಸರ್ಕಾರಿ ನೌಕರರು ಸೇರಿದಂತೆ ಅನರ್ಹರ ಕಾರ್ಡ್ಗಳನ್ನು ರದ್ದುಪಡಿಸಲಾಗುವುದು. ಸ್ವಂತ ಮನೆ ಹೊಂದಿ 2-3 ಮಹಡಿ ಇರುವವರ ಕಾರ್ಡ್ ರದ್ದಾಗಲಿದೆ. ಕಾರ್ಡ್ ದುರ್ಬಳಕೆ ತಡೆಗೆ ಹೊಸ ನಿಯಮವನ್ನೂ ರೂಪುಗೊಳಿಸಲಾಗುತ್ತಿದೆ ಎಂದವರು ತಿಳಿಸಿದರು.