ಆಂಧ್ರ ಪ್ರದೇಶ, ಏ 14 (DaijiworldNews/MS): ಆಂಧ್ರ ಪ್ರದೇಶದ ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.
ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡಿದ್ದು ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ. ಮೃತಪಟ್ಟ ಆರು ಮಂದಿಯಲ್ಲಿ ನಾಲ್ವರು ಬಿಹಾರದಿಂದ ವಲಸೆ ಬಂದ ಕಾರ್ಮಿಕರಾಗಿದ್ದಾರೆ. ಈವರೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ಬೆಂಕಿ ಅವಘಡ ಸಂಭವಿಸಿದಾಗ ಹದಿನೆಂಟು ಮಂದಿ ಔಷಧ ಘಟಕದ 4ನೇ ಘಟಕದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಎರಡು ಗಂಟೆಯಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತಾದರೂ ಅಷ್ಟರಲ್ಲಾಗಲೇ 6 ಮಂದಿ ಸಾವನ್ನಪ್ಪಿದ್ದರು. ಇನ್ನುಳಿದ 12 ಜನರೂ ಗಾಯಗೊಂಡಿದ್ದರು.
ಮೃತರನ್ನು ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಎಂದು ಗುರುತಿಸಲಾಗಿದೆ.
ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡವರಿಗೆ ತಲಾ 5 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 2 ಲಕ್ಷ ರೂ. ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಜತೆಗೆ . ಗಾಯಗೊಂಡವರ ಸ್ಥಿತಿಯ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆಯೂ ಅವರು ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.