ಜಮ್ಮು, ಏ 14 (DaijiworldNews/MS): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಉಗ್ರರು ನಾಗರಿಕನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಕಕ್ರಾನ್ ಪ್ರದೇಶದಲ್ಲಿ ಬುಧವಾರ ರಾತ್ರಿ 7.30ರ ಸುಮಾರಿಗೆ ಭಯೋತ್ಪಾದಕರು ರಜಪೂತ ಸಮುದಾಯಕ್ಕೆ ಸೇರಿದ ಸತೀಶ್ ಕುಮಾರ್ ಸಿಂಗ್ ಎಂಬುವವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ವೃತ್ತಿಯಲ್ಲಿ ಚಾಲಕರಾಗಿರುವ ಸತೀಶ್ ಕುಮಾರ್ ಸಿಂಗ್ ಅವರು ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿನ್ನಲೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
"ಕುಲ್ಗಾಮ್ ನಿವಾಸಿಯಾದ ನಾಗರಿಕ ಸತೀಶ್ ಕುಮಾರ್ ಸಿಂಗ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಭೀಕರ ಭಯೋತ್ಪಾದಕ ಅಪರಾಧದಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಶೀಘ್ರದಲ್ಲೇ ತಟಸ್ಥಗೊಳಿಸಲಾಗುವುದು. ಭಾಗಿಯಾಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಹುಡುಕಾಟ ಪ್ರಗತಿಯಲ್ಲಿದೆ" ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಲಷ್ಕರ್-ಎ-ತಯ್ಯಿಬಾ ಭಯೋತ್ಪಾದಕ ಗುಂಪಿನ ಹೊಸ ಸೇರ್ಪಡೆ ದಾಳಿಯಲ್ಲಿ ಭಾಗಿಯಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಕುಲ್ಗಾಮ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ವಲಸೆ ಹೋಗದ ರಜಪೂತ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ಮಾಡುತ್ತಿದ್ದಾರೆ. ಇಲ್ಲಿನ ರಜಪೂತ ಕುಟುಂಬದವರು ಮುಖ್ಯವಾಗಿ ಸೇಬು ವ್ಯಾಪಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.