ತಿರುವನಂತಪುರಂ, ಏ 19 (DaijiworldNews/HR): ತನಿಖಾಧಿಕಾರಿಗಳನ್ನು ಹತ್ಯೆ ಮಾಡಲು ಸಂಚು ರೂಪಿಸಿದ ಪ್ರಕರಣದಲ್ಲಿ ಪೊಲೀಸರು ನಟನ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದು, ದಿಲೀಪ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ಕುರಿತು ನ್ಯಾಯಮೂರ್ತಿ ಜಿಯಾದ್ ರೆಹಮಾನ್ ಎ. ಎ. ತೀರ್ಪು ಪ್ರಕಟಿಸಿದ್ದು, ಮಾರ್ಚ್ 31ರಂದು ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ಕೋರ್ಟ್, ತೀರ್ಪಿಗೂ ಮೊದಲು ತನಿಖಾ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.
ಇನ್ನು 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರನ್ನು ಹತ್ಯೆ ಮಾಡಲು ನಟ ದಿಲೀಪ್ ಸಂಚು ರೂಪಿಸಿದ್ದಾರೆ ಎಂದು ಕೇರಳ ಕ್ರೈಂ ಬ್ರಾಂಚ್ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದರು.
ಈ ಎಫ್ಐಆರ್ ರದ್ದುಗೊಳಿಸುವಂತೆ ದಿಲೀಪ್ ಹೈಕೋರ್ಟ್ ಮೊರೆ ಹೋಗಿದ್ದು, ಈ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.