ಬೆಂಗಳೂರು, ಮೇ 05 (DaijiworldNews/HR): ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ ಮಾಡಿದ್ದು, ತಮ್ಮ ಪಕ್ಷದವರ ಬಣ್ಣ ಬಯಲಾಗಲಿದೆ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಹಿಟ್ ಆ್ಯಂಡ್ ರನ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಯಾವ ಯಾವ ದೂರುಗಳು ಬರುತ್ತವೆಯೋ?, ಯಾರು ಕೊಡುತ್ತಾರೋ ಅವೆಲ್ಲವನ್ನೂ ಪರಿಗಣಿಸುತ್ತೇವೆ. ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ. ಅದರ ತನಿಖೆಯನ್ನೂ ಮಾಡಿಸುತ್ತೇವೆ ಎಂದರು.
ಇನ್ನು ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ವಿಚಾರದಲ್ಲಿ ನಾವು ಮುಕ್ತವಾಗಿದ್ದು, ನಿಷ್ಪಕ್ಷಪಾತವಾಗಿ ನಿಷ್ಟುರವಾಗಿ ತನಿಖೆಯಾಗಬೇಕು ಎಂದು ಸೂಚಿಸಿದ್ದೇವೆ. ಹಲವಾರು ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಮಾಡುತ್ತಿರುವುದೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.
ಸಚಿವ ಅಶ್ವತ್ಥ್ ನಾರಾಯಣ್ ಬಗ್ಗೆ ಕಾಂಗ್ರೆಸ್ನವರು ಆಧಾರ ರಹಿತವಾದ ಆರೋಪ ಮಾಡುತ್ತಿದ್ದಾರೆ. ಜವಾಬ್ದಾರಿಯುತ ಪ್ರತಿ ಪಕ್ಷವದರು ಬೇರೆಯವರ ಮೇಲೆ ಆರೋಪ ಮಾಡುವಾಗ ಸಾಕ್ಷಿ ಇರಬೇಕು ಎನ್ನುವುದು ಇವರಿಗೆ ತಿಳಿದಿಲ್ಲ. ಇವರು ಹಿಟ್-ಆಯಂಡ್-ರನ್ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.