ಬೆಂಗಳೂರು, ಜೂ 09 (DaijiworldNews/DB): ನಟ ಜೈ ಜಗದೀಶ್ ಅವರು ತನ್ನ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರು ನಾಗಮಂಗಲ ತಾಲೂಕಿನ ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಯರಾಮೇ ಗೌಡ ಎಂಬುವವರು ಈ ದೂರನ್ನು ದಾಖಲಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್ ಅವರು ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜೈ ಜಗದೀಶ್ ಪ್ರಯಾಣಿಸುತ್ತಿದ್ದಾಗ ಅವರ ಕಾರಿನ ಮೇಲೆ ನೀರಿನ ಬಾಟಲಿ ಬಿದ್ದಿತ್ತು. ಬೆಳ್ಳೂರು ಕ್ರಾಸ್ನಲ್ಲಿ ನಾನು ಬಸ್ನಿಂದ ಕೆಳಗೆ ಇಳಿಯುವಾಗ ಹಿಂದಿನಿಂದ ಬಂದ ಅವರು ನನ್ನನ್ನು ನಿಂದಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬಟ್ಟೆ ಹರಿದು ಹಾಕಿದ್ದಾರೆ. ಅಲ್ಲದೆ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಜಯರಾಮೇ ಗೌಡ ದೂರು ನೀಡಿದ್ದಾರೆ.
ಜೂನ್ 5ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೂರಿನ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.