ಬೆಂಗಳೂರು, ಜೂ 15 (DaijiworldNews/MS): ರಾಜ್ಯದ ನೂತನ ಲೋಕಾಯುಕ್ತರಾಗಿ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಲೋಕಾಯುಕ್ತರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಕನ್ನಡದಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನದ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿ, ಶುಭ ಹಾರೈಸಿದರು.
ಲೋಕಾಯುಕ್ತರಾಗಿ ನೇಮಕವಾಗುವ ಮುನ್ನ ನ್ಯಾಯಮೂರ್ತಿ ಪಾಟೀಲ್ ಅವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಹಾಗೂ ನಂತರ ಕರ್ನಾಟಕ ಲೋಕಾಯುಕ್ತದಲ್ಲಿ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು.
ಈ ವರ್ಷದ ಜನವರಿಯಲ್ಲಿ ನ್ಯಾ ವಿಶ್ವನಾಥ್ ಶೆಟ್ಟಿ ಅವರ ನಿವೃತ್ತಿಯಿಂದ ಲೋಕಾಯುಕ್ತ ಹುದ್ದೆ ತೆರವಾಗಿತ್ತು. ಐದು ತಿಂಗಳ ಬಳಿಕ ಇದೀಗ ಸರ್ಕಾರ ಲೋಕಾಯುಕ್ತರನ್ನು ನೇಮಿಸಿದೆ.