ನವದೆಹಲಿ, ಜೂ 15 (DaijiworldNews/MS): ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಎದುರು ಸತತ ಮೂರನೇ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ಬೆಳಿಗ್ಗೆ 11.35ಕ್ಕೆ ರಾಹುಲ್ ಗಾಂಧಿ ಅವರು ತಮ್ಮ Z+ ವರ್ಗದ ಸಿಆರ್ಪಿಎಫ್ ಭದ್ರತಾ ಬೆಂಗಾವಲಿನೊಂದಿಗೆ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ವಿಚಾರಣೆಗ ಹಾಜರಾದರು. ಈ ವೇಳೆ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡಿದ್ದು ಮಾತ್ರವಲ್ಲದೆ ಇಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆಯನ್ನು ನಡೆಸಿದರು.
ರಾಹುಲ್ ಗಾಂಧಿಯನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಕಚೇರಿ ಹಾಗೂ ಇಡಿ ಪ್ರಧಾನ ಕಚೇರಿಯ ಹೊರಗೆ ಬಂಧಿಸಲಾಯಿತು. ಅಧೀರ್ ರಂಜನ್ ಚೌಧರಿ, ಭೂಪೇಶ್ ಬಘೇಲ್ ಮತ್ತು ಪವನ್ ಖೇರಾ ಸೇರಿದಂತೆ ಪಕ್ಷದ ಉನ್ನತ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮೊದಲು, ಬಿಜೆಪಿ ಸರ್ಕಾರವು ಕಾಂಗ್ರೆಸ್ ಕಾರ್ಯಕರ್ತರನ್ನು ತನ್ನ ಪ್ರಧಾನ ಕಚೇರಿಗೆ ಪ್ರವೇಶಿಸದಂತೆ ತಡೆಯುವ ಮೂಲಕ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸುತ್ತಿದೆ ಎಂದು ಪಕ್ಷವು ಆರೋಪಿಸಿದೆ
ಮಂಗಳವಾರ ಕೂಡ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಹುಲ್ ಗಾಂಧಿಯವರನ್ನು 11 ಗಂಟೆಗಳ ಕಾಲ ವಿಚಾರಣೆ ನಡೆಸಿ, ಹೇಳಿಕೆಗಳನ್ನು ನಿಖಾ ಸಂಸ್ಥೆ ಅಧಿಕಾರಿಗಳು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಅನೇಕ ಸೆಷನ್ಗಳಲ್ಲಿ ದಾಖಲಿಸಿದ್ದಾರೆ. ವಿಚಾರಣೆ ಅಪೂರ್ಣಗೊಂಡ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.