ಬೆಂಗಳೂರು, ಜೂ 15 (DaijiworldNews/DB): ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜೂನ್ 16 ಮತ್ತು 17ರಂದು ನಡೆಯಲಿದೆ. ಅಲ್ಲದೆ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ 18ರಂದು ನಡೆಯಲಿದೆ.
ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶು ವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯುವುದಕ್ಕೆ ಸಿಇಟಿ ಪರೀಕ್ಷೆ ಎರಡು ದಿನಗಳ ಕಾಲ ನಡೆಯಲಿದೆ. ಒಟ್ಟು 486 ಕೇಂದ್ರಗಳಲ್ಲಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಎದುರಿಸಲಿದ್ದಾರೆ. 16ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. 17ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ಜರುಗಲಿದೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿಯೂ ಈ ಬಾರಿ ಪ್ರಶ್ನೆ ಮತ್ತು ಉತ್ತರಗಳನ್ನು ನೀಡಲಾಗುವುದು ಎಂದರು.
18ರಂದು ಬೆಳಗ್ಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,708 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದವರು ತಿಳಿಸಿದರು.
ಅಕ್ರಮಗಳು ಘಟಿಸದಂತೆ ತಡೆಯುವ ಸಲುವಾಗಿ ಪ್ರತೀ ಪರೀಕ್ಷಾ ಕೇಂದ್ರದಲ್ಲಿನ ಪ್ರಕ್ರಿಯೆಗಳನ್ನು ವೀಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ಪ್ರಶ್ನೆಪತ್ರಿಕೆ ಪೂರೈಕೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಮೇಲೆ ನಿಗಾ ಇಡಲಾಗುವುದು. ಪ್ರತಿಯೊಂದು ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬರನ್ನು ಪರೀಕ್ಷಾ ವೀಕ್ಷಕರಾಗಿ ನಿಯೋಜಿಸುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.
ನಿಬಂಧನೆ ಪಾಲನೆ ಕಡ್ಡಾಯ
ಸಿಇಟಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು. ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ನಮೂದಿಸಬೇಕು. ಅರ್ಧ ಗಂಟೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ವಿದ್ಯಾರ್ಥಿಗಳು ತಮ್ಮ ಪ್ರವೇಶಪತ್ರ (ಅಡ್ಮಿಶನ್ ಟಿಕೆಟ್) ಮತ್ತು ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರವನ್ನು ತರಬೇಕು. ಅದು ಕಾಲೇಜಿನ ಗುರುತುಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್/ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/12ನೇ ತರಗತಿಯ ಪ್ರವೇಶ ಪತ್ರ ಸೇರಿದಂತೆ ಯಾವುದೇ ಗುರುತು ಪತ್ರ ಆಗಬಹುದು. ಕೈಗಡಿಯಾರ ಕಟ್ಟಿಕೊಂಡು ಪರೀಕ್ಷೆಗೆ ಬರುವಂತಿಲ್ಲ. ಟ್ಯಾಬ್, ಮೊಬೈಲ್, ಕ್ಯಾಲ್ಕುಲೇಟರುಗಳನ್ನೂ ಕೇಂದ್ರದೊಳಗೆ ತರುವಂತಿಲ್ಲ. ಈ ಎಲ್ಲಾ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಇದೇ ವೇಳೆ ಸೂಚಿಸಿದರು.