ಬೆಂಗಳೂರು, ಜೂ 15 (DaijiworldNews/DB): ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೊರ ರಾಜ್ಯಗಳಿಗೆ ಪ್ರವಾಸ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ, ಇಂಗ್ಲಿಷ್ ಭಾಷಾಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ನೀಡಲಾಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಈ ಕುರಿತು ಸ್ಪಷ್ಟನೆ ನೀಡಿದ ಅವರು, ಪ್ರವಾಸ ಕೈಗೊಳ್ಳುವ ರಾಜ್ಯದ ಯಾವುದೇ ವಿದ್ಯಾರ್ಥಿಗಳಿಗೂ ಹಿಂದಿ ಮತ್ತು ಇಂಗ್ಲಿಷ್ ಭಾಷಾಜ್ಞಾನವನ್ನುಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಕಡ್ಡಾಯಗೊಳಿಸಿಲ್ಲ. ಗೊಂದಲಕ್ಕೆ ಕಾರಣವಾದ ಅಧಿಕಾರಿ, ಸಿಬಂದಿ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರದ ವತಿಯಿಂದ ’ಏಕ್ ಭಾರತ್ ಶ್ರೇಷ್ಠ್ ಭಾರತ್’ ಯೋಜನೆಯಡಿ ರಾಜ್ಯದ ಪ್ರೌಢ ಶಾಲೆ ಮತ್ತು ಪಿಯುಸಿಯ ಆಯ್ದ 50 ಮಂದಿ ವಿದ್ಯಾರ್ಥಿಗಳನ್ನು ಹೊರ ರಾಜ್ಯಗಳ ಐತಿಹಾಸಿಕ ಸ್ಥಳಗಳಿಗೆ ಪ್ರವಾಸ ಕರೆದೊಯ್ಯಲಾಗುತ್ತಿದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇದನ್ನು ಆಯೋಜನೆ ಮಾಡಲಾಗುತ್ತಿದೆ. ಆದರೆ ಈ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಹಿಂದಿ ಭಾಷಾಜ್ಞಾನ ಕಡ್ಡಾಯ ಎಂಬ ಗೊಂದಲ ಹುಟ್ಟಿಕೊಂಡ ಬೆನ್ನಲ್ಲೇ ಸಚಿವರು ಗೊಂದಲಕ್ಕೆ ತೆರೆ ಎಳೆದಿದ್ದಾರೆ.