ನವದೆಹಲಿ, ಜೂ 21 (DaijiworldNews/DB): ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ನ್ನು ತೊರೆಯುತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ.
\ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೊದಲು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮತ್ತು ಎಡಪಕ್ಷಗಳ ಆಗ್ರಹದ ಹಿನ್ನೆಲೆಯಲ್ಲಿ ಅವರು ಟಿಎಂಸಿಯನ್ನು ತೊರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಕ್ಷದಲ್ಲಿ ನನಗೆ ಉತ್ತಮ ಗೌರವ ನೀಡಿದ್ದಾರೆ. ಅವರು ಪಕ್ಷದಲ್ಲಿ ನನ್ನನ್ನು ನಡೆಸಿಕೊಂಡ ರೀತಿಗೆ ನಾನು ಆಭಾರಿಯಾಗಿದ್ದೇನೆ. ರಾಷ್ಟ್ರದ ಹಿತಾಸಕ್ತಿಗಾಗಿ ಪಕ್ಷ ತ್ಯಜಿಸಿ ರಾಷ್ಟ್ರಪತಿ ಚುನಾವಣೆಗೆ ನಿಲ್ಲುತ್ತಿದ್ದೇನೆ. ನನ್ನ ನಿರ್ಧಾರವನ್ನು ಮಮತಾ ಅವರು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ ಎಂದಿದ್ದಾರೆ.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಈಗಾಗಲೇ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ಮಹಾತ್ಮ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ, ಫಾರೂಕ್ ಅಬ್ದುಲ್ಲ ಅವರನ್ನು ಪ್ರತಿಪಕ್ಷಗಳು ಸಂಪರ್ಕಿಸಿದ್ದದರೂ, ಈ ಅವಕಾಶವನ್ನು ಮೂವರೂ ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಯಶವಂತ್ ಸಿನ್ಹಾ ಅವರ ಆಯ್ಕೆ ನಡೆದಿದೆ.