ಬೆಂಗಳೂರು, ಜೂ 28 (DaijiworldNews/SM): ಮೇಕೆದಾಟು ಪಾದಯಾತ್ರೆಯನ್ನು ಕೋವಿಡ್ ನಿಯಮಾವಳಿ ಉಲ್ಲಂಘಿಸಿ ನಡೆಸಿದ ಆರೋಪದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸದ್ಯ ರಿಲೀಫ್ ಸಿಕ್ಕಿದೆ.
ಪ್ರಮುಖ ನಾಯಕರ ಜೊತೆಗೆ ಕಾಂಗ್ರೆಸ್ನ 13 ನಾಯಕರನ್ನು ಹೈಕೋರ್ಟ್ ನಿರಾಳರನ್ನಾಗಿಸಿದೆ. ಹಾಗಾಗಿ ಅವರು ಸದ್ಯಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಹೊರಡಿಸಿರುವ ಸಮನ್ಸ್ ಜಾರಿಯಿಂದ ಬಚಾವಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕ್ರಮ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮತ್ತಿತರ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಸುನಿಲ್ ದತ್ ಯಾದವ್ ಅವರನ್ನು ಒಳಗೊಂಡ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ. ಕಾಂಗ್ರೆಸ್ ನಾಯಕರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ, ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎನ್ನುವ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ ಅನ್ವಯಿಸಬೇಕಿತ್ತು. ಆದರೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ. ಕೋವಿಡ್ ಕುರಿತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚನೆಯನ್ನು ಹೊರಡಿಸಿಯೇ ಇಲ್ಲ ಎಂದರು. ಅಲ್ಲದೆ, ಆಡಳಿತಾರೂಢ ಸರ್ಕಾರ, ಕಾಂಗ್ರೆಸ್ ಪಕ್ಷದ ವಿರುದ್ಧ ತಾರತಮ್ಯ ಎಸಗಿದೆ. ಹೀಗಾಗಿ ಕಾಯ್ದೆ ಅನ್ವಯಿಸಿರುವುದು ಕಾನೂನುಬಾಹಿರ ಎಂದು ವಾದಿಸಿದರು. ವಾದ ಆಲಿಸಿದ ಬಳಿಕ ನ್ಯಾಯಾಲಯ ಕಾಂಗ್ರೆಸ್ ನಾಯಕರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ ಜಾರಿಗೊಳಿಸಿತು.
ಪ್ರಕರಣದ ಹಿನ್ನೆಲೆ:
ಕಳೆದ ಮಾರ್ಚ್ನಲ್ಲಿ ಕಾಂಗ್ರೆಸ್ ನಾಯಕರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟುವಿನಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದರು. ಆಗ ನ್ಯಾಯಾಲಯದ ನಿರ್ದೇಶನದ ಮೇರೆಗೆ ರಾಮನಗರ ಜಿಲ್ಲಾ ಪೊಲೀಸರು ದೂರು ಮತ್ತು ಎಫ್ಐಆರ್ ದಾಖಲಿಸಿಕೊಂಡಿದ್ದರು. ಆ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಕೂಡ ಸಲ್ಲಿಕೆಯಾಗಿತ್ತು. ಆ ಬಗ್ಗೆ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಳೆದ ಮೇ ತಿಂಗಳಲ್ಲಿ ಡಿಕೆಶಿ, ಸಿದ್ದರಾಮಯ್ಯ ಸೇರಿ 13 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿಗೊಳಿಸಿತ್ತು, ಅದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.