ಬೆಂಗಳೂರು, ಜೂ 29 (DaijiworldNews/DB): ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ, ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸವಾಮಿ ಹೇಳಿದ್ದಾರೆ.
ರಾಜಸ್ತಾನದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಕುರಿತು ಸರಣಿ ಟ್ವೀಟ್ ಮಾಡಿ ವಿಷಾದ ವ್ಯಕ್ತಪಡಿಸಿದ ಅವರು, ರಾಜಸ್ಥಾನದಲ್ಲಿ ಮುಗ್ಧ ಟೈಲರ್ ಶಿರಚ್ಛೇದ ಮಾಡಿರುವ ಘಟನೆ ನನಗೆ ತೀವ್ರ ಘಾಸಿ ಉಂಟು ಮಾಡಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೈಶಾಚಿಕ ಕೃತ್ಯ. ಹಿಂಸೆ ಯಾವುದಕ್ಕೂ ಉತ್ತರವಲ್ಲ, ಪರಿಹಾರವೂ ಅಲ್ಲ. ಯಾವ ಧರ್ಮವೂ ಹಿಂಸೆಯನ್ನು ಒಪ್ಪುವುದೂ ಇಲ್ಲ ಎಂದಿದ್ದಾರೆ.
ಮಾನವೀಯತೆ ಸತ್ತರಷ್ಟೇ ಕೋಮುವಾದ ವಿಜೃಂಭಿಸುತ್ತದೆ. ದರ್ಪ ಹೆಚ್ಚಿದಷ್ಟೂ ಧರ್ಮಗಳೂ ಅಳಿಯುತ್ತವೆ. ಕನ್ಹಯ್ಯ ಅವರ ಕೊಲೆ ಇಂಥ ದರ್ಪವನ್ನು ನಾಮಾವಶೇಷ ಮಾಡಲಿ ಎಂದು ಎಚ್ಡಿಕೆ ಟ್ವೀಟಿಸಿದ್ದಾರೆ.
ಕನ್ಹಯ್ಯ ಅವರಿಗಾಗಿ ಇಡೀ ಭಾರತ ಕಣ್ಣೀರಿಡುತ್ತಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ. ಕನ್ಹಯ್ಯ ಅವರ ಸಾವು, 'ಕೊಂದು ವಿಜೃಂಭಿಸುವ ಕಿರಾತಕ ಮನಃಸ್ಥಿತಿಯನ್ನು ಬದಲಿಸಲಿ.' ಅವರ ಕುಟುಂಬದ ಜತೆ ನಾವೆಲ್ಲರೂ ನಿಲ್ಲೋಣ ಎಂದು ಇದೇ ವೇಳೆ ಅವರು ಮನವಿ ಮಾಡಿದ್ದಾರೆ.