ವಿಜಯವಾಡ, ಜು 08 (DaijiworldNews/HR): ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಹಿಂದಿರುಗುವ ವೇಳೆ ಗನ್ನವರಂ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಕಪ್ಪು ಬಲೂನ್ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೀವ್ ರತನ್ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ.
ರಾಜೀವ್ ರತನ್ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಮೂರು ದಿನಗಳಿಂದ ಪೊಲೀಸ್ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಗುರುವಾರದಂದು ತಮ್ಮ ಪಕ್ಷದ ಮುಖಂಡರ ಜತೆ ಠಾಣೆಗೆ ಬಂದ ರಾಜೀವ್ ಪೊಲೀಸರ ಮುಂದೆ ಶರಣಾಗಿದ್ದಾರೆ.
ಇನ್ನು ಜುಲೈ 4 ರಂದು ಪಶ್ಚಿಮ ಗೋದಾವರಿ ಜಿಲ್ಲೆಗೆ ಪ್ರಧಾನಿ ಭೇಟಿಯನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ಹಲವೆಡೆ ಪ್ರತಿಭಟನೆ ನಡೆಸಿದ್ದು, ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುವ ವೇಳೆ ಗನ್ನವರಂ ವಿಮಾನ ನಿಲ್ದಾಣದ ಸಮೀಪ ಕಪ್ಪು ಬಲೂನ್ ಹಾರಿಸಿ ಪ್ರತಿಭಟನೆ ನಡೆಸಿದ್ದರು.