ನವದೆಹಲಿ ಜು 18 (DaijiworldNews/MS): ದೇಶದ ಪ್ರಥಮ ಪ್ರಜೆಯ ಆಯ್ಕೆಯ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡಲಿದ್ದಾರೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿ ಇದ್ದಾರೆ.
ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೇಲ್ನೋಟಕ್ಕೆ ಮತ ಲೆಕ್ಕಚಾರ ನಡೆಸಿದರೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಹೆಚ್ಚು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಹೆಚ್ಚಾಗಿದೆ.
ಬಿಜೆಡಿ, ವೈಎಸ್ ಆರ್ ಸಿಪಿ, ಬಿಎಸ್ ಪಿ, ಎಐಎಡಿಎಂಕೆ, ಟಿಡಿಪಿ, ಜೆಡಿಎಸ್, ಶಿರೋಮಣಿ ಅಕಾಲಿ ದಳ, ಶಿವಸೇನಾ, ಜೆಎಂಎಂನಂತಹ ಪ್ರಾದೇಶಿಕ ಪಕ್ಷಗಳು ಮುರ್ಮು ಅವರಿಗೆ ಬೆಂಬಲ ನೀಡಿದೆ.