ಬೆಂಗಳೂರು, ಜು 23 (DaijiworldNews/DB): ಪಕ್ಷದ ಬಗ್ಗೆ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷಕ್ಕಾಗಿ ಬಾಯಿ ಮುಚ್ಚಿಕೊಂಡು ಎಲ್ಲರೂ ದುಡಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾಕೀತು ಮಾಡಿದ್ದಾರೆ.
ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ಕುರಿತು ಸದಾಶಿವನಗರ ನಿವಾಸದ ಬಳಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕೇ ಹೊರತು ವ್ಯಕ್ತಿ ಪೂಜೆ ಮಾಡುವುದಲ್ಲ. ಎಲ್ಲರಿಗೂ ಈ ಮಾತನ್ನು ಹೇಳುತ್ತಿದ್ದೇನೆ ಎಂದರು.
ಮುಸ್ಲಿಮರ ಸಲೂನ್ ಬಂದ್ ಮಾಡಿಸಬೇಕೆಂಬ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಂವಿಧಾನಬದ್ದವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿ, ಸಚಿವರು ಇದಕ್ಕೆ ಉತ್ತರ ನೀಡಬೇಕೇ ಹೊರತು ನಾನಲ್ಲ. ಬಿಜೆಪಿ ಸರ್ಕಾರವೇ ಇಂತಹ ಮಾತುಗಳನ್ನು ಹೇಳಿಸುತ್ತಿದ್ದು, ಹಳೇ ಮೈಸೂರು ಮುಂತಾದೆಡೆ ಇದೇ ರೀತಿ ಪ್ರಚೋದಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ಕೋಲಾರದಲ್ಲಿ ಪ್ರತ್ಯೇಕ ಬಣಗಳ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಬಣ ಕೋಲಾರದಲ್ಲಿ ಇಲ್ಲ. ಸೋನಿಯಾ ಗಾಂಧಿಗೆ ರಕ್ಷಣೆ ಸಿಗಬೇಕೆಂಬ ನಿಟ್ಟಿನಲ್ಲಿ ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.