ಬೆಂಗಳೂರು, ಜು 25 (DaijiworldNews/MS): 2022 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಘೋಷಿಸಿದ್ದಾರೆ.
ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿದ್ದು ಜು. ೩೦ ರ ಶನಿವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.