ಬೆಂಗಳೂರು, ಜು 29 (DaijiworldNews/HR): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ. ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು ಎಂದಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕ್ಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದರು.
ಇನ್ನು ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ ಆರೋಪಿಸಿದ್ದಾರೆ.
ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಬಿಜೆಪಿ ಸರ್ಕಾರ ತೋರಬೇಕು ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ? ಎಂದು ಪ್ರಶ್ನಿಸಿದ್ದಾರೆ.