ನವದೆಹಲಿ, ಆ 06 (DaijiworldNews/HR): ಉಪರಾಷ್ಟಪತಿ ಸ್ಥಾನದ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ, ಬಿಜೆಪಿ ತರದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಕೇಂದ್ರ ಸಚಿವರಾದ ಅಮಿತ್ ಷಾ, ರಾಜ್ ನಾಥ್ ಸಿಂಗ್, ನಿರ್ಮಲ ಸೀತಾರಾಮನ್ ಸೇರಿದಂತೆ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಮತ ಚಲಾಯಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಸಂಸತ್ ಭವನದ ಕೊಠಡಿ ಸಂಖ್ಯೆ 63ರಲ್ಲಿ ಮತದಾನ ನಡೆಯುತ್ತಿದ್ದು, ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಮತ್ತು ವಿರೋಧ ಪಕ್ಷಗಳ ಸಹಮತದ ಅಭ್ಯರ್ಥಿಯಾಗಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಕಣಕಿಳಿದಿದ್ದಾರೆ.
ಲೋಕಸಭೆಯಲ್ಲಿ 23 ಮತ್ತು ರಾಜ್ಯಸಭೆಯಲ್ಲಿ 16 ಸಂಸದರನ್ನು ಹೊಂದಿರುವ ತೃಣಮೂಲ ಕಾಂಗ್ರೆಸ್ ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದೆ ಎನ್ನಲಾಗಿದೆ.
ಇನ್ನು ಹಾಲಿ ಉಪರಾಷ್ಟಪತಿ ಎಂ.ವೆಂಕಯ್ಯನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಮುಕ್ತಾಯಗೊಳ್ಳುತ್ತಿದ್ದು, ಆಗಸ್ಟ್ 11 ರಂದು ನೂತನ ಉಪರಾಷ್ಟಪತಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.