ಬೆಂಗಳೂರು, ಆ 23 (DaijiworldNews/SM): "ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡಿದ್ದಾರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೊಡಗು ಜಿಲ್ಲೆಯ ಜೆಡಿಎಸ್ ಮುಖಂಡರ ಜತೆ ಪಕ್ಷ ಸಂಘಟನೆ ಕುರಿತು ಚರ್ಚಿಸಿದ ನಂತರ ಎಚ್ಡಿಕೆ ಮಾಧ್ಯಮಗಳ ಜತೆ ಮಾತನಾಡುತ್ತಿದ್ದರು. "40 ಪರ್ಸೆಂಟ್ ಸರಕಾರ ಎಂದು ರಾಜ್ಯ ಬಿಜೆಪಿ ಸರಕಾರದ ಬಗ್ಗೆ ಬೀದಿಯಲ್ಲಿ ಜನ ಮಾತನಾಡುತ್ತಾರೆ. ಇಲ್ಲೇ ಹೆಗ್ಗಣ ಸತ್ತು ಬಿದ್ದಿದೆ. ಪಿಎಸ್ಐ ನೇಮಕಾತಿ ಹಗರಣ, ಪ್ರಾಧ್ಯಾಪಕರ ನೇಮಕ ಹಗರಣ ಸೇರಿದಂತೆ ಅನೇಕ ಕರ್ಮಕಾಂಡಗಳು ಬೇಕಾದಷ್ಟಿವೆ".
"ಸ್ವತಃ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದರ ಬಗ್ಗೆ ಸದ್ದು ಗದ್ದಲ ಇಲ್ಲ. ದೆಹಲಿಯಲ್ಲಿ ಮನೀಶ್ ಸಿಸೋಡಿಯಾ ಅವರ ಮೇಲೆ ಅಬಕಾರಿ ನೀತಿ ವಿಚಾರದಲ್ಲಿ, ಕೇವಲ ಒಂದೆರಡು ಕೋಟಿ ಕುರಿತ ಸಿಬಿಐ ತನಿಖೆ ನಡೆಯುತ್ತಿದೆ. ಆದರೆ, ನಮ್ಮ ರಾಜ್ಯದಲ್ಲಿ ಸಾವಿರಾರು ಕೋಟಿ ಲೂಟಿ ಆದರೂ ಕೇಳುವವರು ಇಲ್ಲ" ಎಂದು ಕುಮಾರಸ್ವಾಮಿ ಕಿಡಿಕಾರಿದರು. ಮಂಗಳೂರಿನಲ್ಲಿ ಪ್ರಧಾನಿ ಏನು ಸಂದೇಶ ಕೊಡುತ್ತಾರೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, "ದೇಶಕ್ಕೆ ಆರ್ಥಿಕ ಶಕ್ತಿ ಕೊಡುವಂತ ನಗರ ಮಂಗಳೂರು. ಆದರೆ ದೇಶಕ್ಕೆ ಮಾರಕ ಆಗುವಂತ ವಾತಾವರಣವನ್ನು ಅಲ್ಲಿ ಸೃಷ್ಟಿ ಮಾಡಿದ್ದಾರೆ" ಎಂದು ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದರು.