ನವದೆಹಲಿ, ಅ 25 (DaijiworldNews/MS): ಪಂಜಾಬ್ನ ಫಿರೋಜ್ಪುರದಲ್ಲಿ ಪ್ರಧಾನಿ ಮೋದಿಯವರ ಭದ್ರತೆಗೆ ಸಂಬಂಧಿಸಿದಂತೆ ಸಂಪೂರ್ಣ ನಿರ್ಲಕ್ಷ್ಯ ಪ್ರಕರಣದಲ್ಲಿ ಅಂದಿನ ಜಿಲ್ಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ದೀಪ್ ಭನ್ಸ್ ಅವರನ್ನು ದೋಷಿಯನ್ನಾಗಿಸಲಾಗಿದೆ.
ಪಂಜಾಬ್ ವಿಧಾನಸಭಾ ಚುನಾವಣೆಗೆ ಮೊದಲು 42,750 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ಜನವರಿ 5 ರಂದು ಫಿರೋಜ್ಪುರಕ್ಕೆ ಭೇಟಿ ನೀಡಬೇಕಿತ್ತು. ಆದರೆ ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿಮೀ ದೂರದಲ್ಲಿ, ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನುಅಡ್ದಗಟ್ಟಿರುವುದು ಕಂಡುಬಂದಿತ್ತು. ಇದರಿಂದಾಗಿ ಪ್ರಧಾನಿಯವರು 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡಿದ್ದರು .
ಈ ಪ್ರಕರಣ ವಿಚಾರಣೆಗೆ ಜನವರಿ 13 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಲ್ಹೋತ್ರಾ ಅವರ ಅಧ್ಯಕ್ಷತೆಯಲ್ಲಿ 5 ಸದಸ್ಯರ ಸಮಿತಿಯನ್ನು ನೇಮಿಸಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಚಿಸಿರುವ ತನಿಖಾ ಸಮಿತಿಗಳ ಕ್ರಮಕ್ಕೆ ತಡೆ ನೀಡಿ ರಾಜ್ಯ ಸರ್ಕಾರ ಮಾಡಿರುವ ಭದ್ರತಾ ವ್ಯವಸ್ಥೆಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒದಗಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ಗೆ ಸುಪ್ರೀಂ ಕೋರ್ಟ್ (ಎಸ್ಸಿ) ನಿರ್ದೇಶನ ನೀಡಿತ್ತು.
ಈ ವಿಶೇಷ ಸಮಿತಿಯು ಪ್ರಧಾನಿಯವರ ಭದ್ರತೆಯ ಲೋಪಕ್ಕೆ ಫಿರೋಜ್ಪುರ ಎಸ್ಎಸ್ಪಿಯನ್ನು ಹೊಣೆಗಾರರನ್ನಾಗಿ ಮಾಡಿದೆ. ಸಾಕಷ್ಟು ಸಮಯ ಮತ್ತು ಪಡೆಗಳು ಲಭ್ಯವಿದ್ದರೂ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಅವರು ವಿಫಲರಾಗಿದ್ದಾರೆ ಎಂದು ಸುಪ್ರಿಂ ಕೋರ್ಟ್ ಹೇಳಿದೆ. ವರದಿಯನ್ನು ಕೇಂದ್ರ ಮತ್ತು ಪಂಜಾಬ್ ಸರ್ಕಾರಗಳಿಗೆ ಕಳುಹಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ ಹಾಗೂ ಈ ವಿಷಯವನ್ನು ಇಲ್ಲಿಗೇ ಮುಚ್ಚಲಾಗಿದೆ ಎಂದಿದೆ.