ನವದೆಹಲಿ, ಸೆ 05(DaijiworldNews/MS): ಬ್ಯಾಂಕ್ ಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ದದ ನ್ಯಾಯಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯ ತಪ್ಪಿತಸ್ಥರೆಂದು ಸಾಬೀತಾಗಿರುವ ಹಿನ್ನೆಲೆಯಲ್ಲಿ ವಿಜಯ್ ಮಲ್ಯ ವಿರುದ್ಧದ ಶಿಕ್ಷೆಯ ಪ್ರಮಾಣವನ್ನು ಸುಪ್ರೀಂಕೋರ್ಟ್ ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ.
ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಮಾರ್ಚ್ 10 ರಂದು ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯ ಆದೇಶವನ್ನು ಕಾಯ್ದಿರಿಸಿತ್ತು.
ನಿಷ್ಕ್ರಿಯ ಕಿಂಗ್ಫಿಷರ್ ಏರ್ಲೈನ್ಸ್ಗೆ ಸಂಬಂಧಿಸಿದ ಸುಮಾರು 9,000 ಕೋಟಿ ರುಪಾಯಿಗಳ ಬ್ಯಾಂಕ್ ಸಾಲದ ಡೀಫಾಲ್ಟ್ ಪ್ರಕರಣದಲ್ಲಿ ವಿಜಯ್ ಮಲ್ಯ ಆರೋಪಿಯಾಗಿದ್ದಾರೆ. ಈ ವೇಳೆ ಕೋರ್ಟ್ ಆದೇಶದ ಹೊರತಾಗಿಯೂ ಮಲ್ಯ ಅವರು ತಮ್ಮ ಹೆಸರಿನಲ್ಲಿದ್ದ ಆಸ್ತಿಯನ್ನು ತಮ್ಮ ಮಕ್ಕಳ ಹೆಸರ್ಗೆ ವರ್ಗಾಯಿಸಿದ್ದರು. ಈ ಮೂಲಕ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆಂದು ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ನೇತೃತ್ವದ ಬ್ಯಾಂಕುಗಳ ಒಕ್ಕೂಟ ಆರೋಪಿಸಿತ್ತು.