ಶಿವಮೊಗ್ಗ, ಸೆ 13 (DaijiworldNews/HR): ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಮೋಹನ್ ಪ್ರಸಾದ್ (70), ಅಮರನಾಥ್ (30) ಎಂದು ಗುರುತಿಸಲಾಗಿದೆ.
ತಂದೆ ಮತ್ತು ಮಗ ನಿಲ್ದಾಣಕ್ಕೆ ಬಂದಾಗ ರೈಲು ಹೊರಟಿದ್ದು, ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಗ ಅಮರನಾಥ್ ಕಾಲು ಜಾರಿ ಕೆಳಗೆ ಬಿದ್ದಿದ್ದು, ಆತನ ರಕ್ಷಣೆಗೆ ಧಾವಿಸಿದ ಮೋಹನ್ ಪ್ರಸಾದ್ ಅವರು ರೈಲಿನ ಅಡಿಗೆ ಸಿಲುಕಿದ್ದಾರೆ.
ಇನ್ನು ಅಮರನಾಥ್ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಮೋಹನ್ ಪ್ರಸಾದ್ ಅವರಿಗೂ ಗಂಭೀರ ಗಾಯವಾಗಿತ್ತು. ತಕ್ಷಣ ಅವರಿಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಮುಂದಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.