ಕೋಲಾರ, ಸೆ 18 (DaijiworldNews/SM): ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಹೊರಬೇಕು. ನೈತಿಕಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಒತ್ತಾಯಿಸಿದ್ದಾರೆ.
ಇಂದು ಕೋಲಾರದಲ್ಲಿ ಜಾತ್ಯತೀತ ಜನತಾದಳ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಇಬ್ಬರು ರೋಗಿಗಳ ಸಾವಿನ ಬಗ್ಗೆ ರಾಜ್ಯ ಸರ್ಕಾರ ವಾಸ್ತವಾಂಶಗಳನ್ನು ಸ್ಪಷ್ಟಪಡಿಸಿಲ್ಲ. ನೈತಿಕತೆ ಇದ್ದಿದ್ದರೆ ಆರೋಗ್ಯ ಸಚಿವರು ಬಳ್ಳಾರಿಯ ಆಸ್ಪತ್ರೆಗೆ ಮೊದಲು ಹೋಗಬೇಕಿತ್ತು. ಅವರು ಹೋಗಲಿಲ್ಲ, ಅವರು ಬೆಂಗಳೂರಿನಲ್ಲಿ ಇದ್ದುಕೊಂಡೇ ಮಾತನಾಡುತ್ತಿದ್ದರು. ಇನ್ನು; ನಮಗೆ ಕೆಟ್ಟ ಹೆಸರು ತರಬೇಕು ಎಂದು ಕೆಲವರು ಷಡ್ಯಂತ್ರ ನಡೆಸಿ ಹೀಗೆ ಮಾಡಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕರು ಹೇಳುತ್ತಿದ್ದಾರೆ. ಈಗ ತನಿಖಾ ತಂಡವನ್ನು ಕಳಿಸುತ್ತೇನೆ ಅಂತಿದ್ದಾರೆ ಸಚಿವರು. ಜನತೆಗೆ ಸತ್ಯ ಹೇಳಲು ಎಷ್ಟು ದಿನ ಬೇಕು? ಆರೋಗ್ಯ ಸಚಿವರೇ ಇದರ ನೈತಿಕಹೊಣೆ ಒಪ್ಪಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.