ನವದೆಹಲಿ, ಸೆ 19 (DaijiworldNews/SM): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠದಿಂದ ತಡೆ ನೀಡಿದೆ. 2018ರಲ್ಲಿ ಡಿಕೆ ಶಿವಕುಮಾರ ಬಳಿ ಐಟಿ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಈಗಲ್ಟನ್ ರೆಸಾರ್ಟ್ನಲ್ಲಿ ಐಟಿ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿತ್ತು.
ಡಿಕೆ ಶಿವಕುಮಾರ ಇದ್ದ ರೂಂನಲ್ಲಿ ಹಣಕಾಸು ವರ್ಗಾವಣೆ ದಾಖಲೆ ವಶ ಪಡಿಸಿಕೊಳ್ಳಲಾಗಿತ್ತು. ಆದರೆ ಐಟಿ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ 'ಸುಪ್ರೀಂ' ಮೊರೆ ಹೋಗಿತ್ತು. ಇನ್ನು ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಅಷ್ಟೇ ಅಲ್ಲದೇ 4 ವಾರದ ಒಳಗಡೆ ಹೊಸ ಅರ್ಜಿ ಸಲ್ಲಿಕೆ ಮಾಡುವಂತೆ ಐಟಿಗೆ ಸುಪ್ರೀಂ ಸೂಚಿಸಿದೆ.
2017ರ ಆಗಸ್ಟ್ 2ರಂದು ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾಗಿತ್ತು. ಈ ಸಂದರ್ಭದಲ್ಲಿ ಈಗಲ್ಟನ್ ರೆಸಾರ್ಟ್ನಲ್ಲಿ ಗುಜರಾತಿನ 44 ಮಂದಿ ಕಾಂಗ್ರೆಸ್ ಶಾಸಕರ ಯೋಗಕ್ಷೇಮದ ಉಸ್ತುವಾರಿಯನ್ನು ಡಿ.ಕೆ. ಶಿವಕುಮಾರ್ ನೋಡಿಕೊಳ್ಳುತ್ತಿದ್ದರು. ಈ ಮಾಹಿತಿ ತಿಳಿದ ಅಧಿಕಾರಿಗಳು ಅಲ್ಲಿಯೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.