ಬೆಂಗಳೂರು, ಸೆ 19 (DaijiworldNews/SM): ರಾಜ್ಯದಲ್ಲಿ ನಡೆದಿರುವ ಹಗರಣವೊಂದನ್ನು ಬಯಲಿಗೆ ತರುವ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿಕೆ ತುದಿಗಾಲಲಿದ್ದಾರೆ. ಸದನದಲ್ಲಿ ಮಾತನಾಡಲು ಅವಕಾಶ ಕೊಡಬೇಕು ಎಂದು ಈಗಾಗಲೇ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬೇರೆ ಬೇರೆ ವಿಚಾರಗಳ ಚರ್ಚೆಗೆ ಅವಕಾಶ ನೀಡಲಾಗಿದ್ದ ಕಾರಣದಿಂದ ತಡವಾಗಿ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಬಹುಶಃ ಮಂಗಳವಾರ ಅವಕಾಶ ಸಿಗಬಹುದು ಎಂದು ತಿಳಿಸಿದರು.
ಸದನದಲ್ಲಿ ನಾನು ಪ್ರಸ್ತಾಪ ಮಾಡಲಿರುವ ವಿಷಯ ಅತ್ಯಂತ ಗಂಭೀರ ವಿಚಾರ. ಪೂರ್ಣವಾಗಿ ದಾಖಲೆಗಳನ್ನು ಇಟ್ಟುಕೊಂಡೇ ಮಾತನಾಡುತ್ತೇನೆ. ಗಾಳಿಯಲ್ಲಿ ಗುಂಡು ಹಾರಿಸೋನು, ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಮಾಡ್ತಾರೆ ಎಂದು ಹೇಳುವವರಿಗೆ ಉತ್ತರ ಕೊಡುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ಸಾವಿರಾರು ಕೋಟಿ ವ್ಯವಹಾರಕ್ಕೆ ಸಂಬಂಧಪಟ್ಟ ವಿಷಯ ಅದು. ಈ ಒಂದು ವಿಷಯದಲ್ಲಿ ಸರ್ಕಾರ ಆಘಾತಕಾರಿ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಿದರು.