ನವದೆಹಲಿ, ಸೆ 22 (DaijiworldNews/DB): ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಕೇವಲ ಹುದ್ದೆಯಲ್ಲ, ಅದು ನಂಬಿಕೆಯ ಸಂಕೇತವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಾಕಾಂಕ್ಷಿಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಲಹೆ ಮಾಡಿದ್ದಾರೆ.
ಸೆಪ್ಟೆಂಬರ್ 24ರಂದು ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಈ ನಡುವೆ ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಗಳಿಗೆ ಗುರುವಾರ ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯು ನಂಬಿಕೆಯ ಸಂಕೇತವಾಗಿದೆ. ಭಾರತದ ದೃಷ್ಟಿಕೋನವನ್ನು ಪ್ರತಿನಿಧಿಸುವಲ್ಲಿ ಈ ಹುದ್ದೆ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷ ಸ್ಥಾನ ಅಲಂಕರಿಸಲು ಮುಂದಾಗಬೇಕು. ಕೇವಲ ಹುದ್ದೆಯ ದೃಷ್ಟಿಯಿಂದ ಮುಂದುವರಿಯಬಾರದು ಎಂದು ಸಲಹೆ ಮಾಡಿದ್ದಾರೆ.
ಇದೇ ವೇಳೆ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, ದೇಶದ ಸ್ವಾಯತ್ತ ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಂಡಿರುವ ಆಡಳಿತ ಯಂತ್ರದ ವಿರುದ್ದ ನಾವು ಅವಿರತ ಹೋರಾಡುತ್ತಿದ್ದೇವೆ. ಅವರ ಬಳಿ ಹಣ ಇರಬಹುದು. ಹಾಗಾಗಿ ಖರೀದಿ ಮಾಡುತ್ತಾರೆ. ಜನರ ಮೇಲೆ ಒತ್ತಡ ಹೇರುವುದು, ಬೆದರಿಕೆ ಹಾಕುವುದು ಅವರಿಗೆ ಸಾಮಾನ್ಯವಾಗಿದೆ. ಇಂತಹವುಗಳ ವಿರುದ್ದ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದರು.