ಬೆಂಗಳೂರು, ಸೆ 27 (DaijiworldNews/HR): ರಾಜ್ಯದ ವಿವಿಧೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಪೊಲೀಸರು ಯಾವುದೇ ದಾಳಿ ನಡೆಸಿಲ್ಲ, ಕೇವಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೆಲವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಪೊಲೀಸರು ಅವರಿಗೆ ಬಂದ ಮಾಹಿತಿಯ ಆಧಾರದ ಮೇಲೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾರಂಭಿಸಿದ್ದಾರೆ ಮತ್ತು ಸ್ಥಳೀಯ ಅಧಿಕಾರಿಗಳ ಮೂಲಕ ಕ್ರಮ ಕೈಗೊಂಡಿದ್ದಾರೆ ಎಂದರು.
ಇನ್ನು ರಾಜ್ಯದ ಕೆಲವು ಭಾಗಗಳಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಮತ್ತು ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಇದುವರೆಗೆ ಬಂಧಿಸಿರುವ ವ್ಯಕ್ತಿಗಳ ಸಂಖ್ಯೆ ನನ್ನ ಬಳಿ ಇಲ್ಲ. ವಿವರಗಳನ್ನು ಸಂಗ್ರಹಿಸಿ ಮಾಧ್ಯಮಗಳೊಂದಿಗೆ ಹಂಚಿಕೊಳ್ಳುತ್ತೇನೆ, ಎಂದು ಹೇಳಿದ್ದಾರೆ.