ನವದೆಹಲಿ, ಸೆ 30 (DaijiworldNews/DB): ಮಗಳ ಹೆರಿಗೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಅವಕಾಶ ನೀಡುವಂತೆ ಕೋರಿ ಅಕ್ರಮ ಗಣಿ ಹಗರಣ ಪ್ರಕರಣ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಮುಂದಿನ ಕೆಲವು ದಿನಗಳಲ್ಲಿ ತನ್ನ ಮಗಳಿಗೆ ಹೆರಿಗೆಯಾಗಲಿದೆ. ಹೀಗಿರುವಾಗ ಕುಟುಂಬ ಸದಸ್ಯರೊಂದಿಗೆ ನಾನಿರುವುದು ಅಗತ್ಯ. ಹೀಗಾಗಿ ಕನಿಷ್ಠ ಒಂದು ತಿಂಗಳು ಬಳ್ಳಾರಿಯಲ್ಲಿರಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.
ಎರಡು ತಿಂಗಳ ಕಾಲ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲು ಸಿಬಿಐ ಆಕ್ಷೇಪ ವ್ಯಕ್ತಪಡಿಸಿತ್ತು. ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ನ್ಯಾ. ಎಂಆರ್.ಶಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.
ಬಹುಕೋಟಿ ಗಣಿ ಹಗರಣಕ್ಕೆ ಸಂಬಂಧಿಸಿದಂತೆ 2009ರಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ ಕರ್ನಾಟಕದ ಬಳ್ಳಾರಿ, ಆಂಧ್ರಪ್ರದೇಶದ ಕಡಪಾ ಮತ್ತು ಅನಂತಪುರ ಜಿಲ್ಲೆಗಳಿಗೆ ಪ್ರವೇಶಿಸದಂತೆ ಕಠಿಣ ನಿರ್ಬಂಧ ವಿಧಿಸಿತ್ತು.