ಬೆಂಗಳೂರು, ಅ 04 (DaijiworldNews/MS): ಹೊನ್ನಾವರದ ಪರೇಶ್ ಮೇಸ್ತ ಪ್ರಕರಣದಲ್ಲಿ ಕಾಂಗ್ರೆಸ್ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
2017ರ ಡಿಸೆಂಬರ್ 6ರಂದು ಉತ್ತರ ಕನ್ನಡದ ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಮೇಸ್ತಾನನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.
ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು' ಎಂದಿದ್ದಾರೆ. 'ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ' ಎಂದಿದ್ದಾರೆ.