ವಡೋದರಾ, ಅ 04 (DaijiworldNews/DB): ಕಂಟೈನರ್ ಆಟೋ ರಿಕ್ಷಾಕ್ಕೆ ಗುದ್ದಿ ಏಳು ಮಂದಿ ಸಾವನ್ನಪ್ಪಿದ ಘಟನೆ ವಡೋದರಾದ ದರ್ಜಿಪುರ ಪ್ರದೇಶದಲ್ಲಿ ಇಂದು ನಡೆದಿದೆ.
ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದರೆ, ಏಳು ಮಂದಿ ಗಾಯಗೊಂಡಿದ್ದಾರೆ. ಆಟೋಕ್ಕೆ ಢಿಕ್ಕಿಯಾದ ಕಂಟೇನರ್ ಬಳಿಕ ವಾಯುಪಡೆ ನಿಲ್ದಾಣದ ಗೋಡೆಯನ್ನು ಪ್ರವೇಶಿಸಿದೆ. ಢಿಕ್ಕಿಯ ರಭಸಕ್ಕೆ ಆಟೋ ಪುಡಿಪುಡಿಯಾಗಿದೆ ಎಂದು ತಿಳಿದು ಬಂದಿದೆ. ವಾಯುಪಡೆಯ ಸಿಬಂದಿ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನು ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬಗಳಿಗೆ ದುಃಖವನ್ನು ಸಹಿಸುವ ಶಕ್ತಿ ಲಭಿಸಲಿ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹೇಳಿದ್ದಾರೆ. ಅಲ್ಲದೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.