ಮೈಸೂರು, ಅ 05 (DaijiworldNews/MS): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಂದಿ ಧ್ವಜ ಕಂಬಕ್ಕೆ ಪೂಜೆ ಸಲ್ಲಿಸಿದ ಬಳಿಕ, ದಸರಾ ಜಂಬೂಸವಾರಿ ಮೆರವಣಿಗೆ ಆರಂಭಗೊಳ್ಳಲಿದೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಕಾಲ ಜಂಬೂಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಸೀಮಿತವಾಗಿತ್ತು. ಈ ಬಾರಿ ಜಂಬೂಸವಾರಿಯನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಿರುವ ಹಿನ್ನಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ.
ಇನ್ನು ಈ ಬಾರಿ ದಸರಾದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸ್ತಬ್ದ ಚಿತ್ರ ಪ್ರದರ್ಶನವೂ ಎಲ್ಲರ ಗಮನ ಸೆಳೆದಿದೆ.
ಸಂಜೆ 5.07 ರಿಂದ 5.18 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ಗಜರಾಜ 'ಅಭಿಮನ್ಯು’ ಹೊರಲಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಕಾವೇರಿ ಹಾಗೂ ಚೈತ್ರಾ ‘ಕುಮ್ಕಿ’ ಆನೆಗಳಾಗಿ ಅಭಿಮನ್ಯುವಿನ ಜೊತೆ ಸಾಗಲಿವೆ. ಈ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ಕುಮಾರ್, ಮೇಯರ್ ಶಿವಕುಮಾರ್ ಉಪಸ್ಥಿತರಿರಲಿದ್ದಾರೆ.