ಕೋಲ್ಕತ್ತಾ, ಅ 06 (DaijiworldNews/DB): ದುರ್ಗಾದೇವಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಬಂದ ದಿಢೀರ್ ಪ್ರವಾಹದಿಂದಾಗಿ ಹತ್ತು ಮಂದಿ ಜಲಸಮಾಧಿಯಾದ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ.
ಜಲ್ ಪೈಗುರಿಯ ನಿಯೋರಾ ನದಿಯಲ್ಲಿ ದುರ್ಗಾದೇವಿ ಮೂರ್ತಿಯನ್ನು ಜಲಸ್ಥಂಭನ ಮಾಡಲಾಗುತ್ತಿತ್ತು. ಈ ವೇಳೆ ನದಿಯಲ್ಲಿ ಏಕಾಏಕಿ ಪ್ರವಾಹ ಬಂದು ದುರ್ಘಟನೆ ಸಂಭವಿಸಿದೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಿದ್ದು, ಹತ್ತು ಮಂದಿಯ ಮೃತದೇಹಗಳು ಪತ್ತೆಯಾಗಿವೆ.ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕಳೆದೆರಡು ದಿನಗಳಿಂದ ಇಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಯಲ್ಲಿ ನೀರಿನ ಮಟ್ಟವೂ ಹೆಚ್ಚಿತ್ತು. ಆದರೆ ಮೂರ್ತಿ ವಿಸರ್ಜನೆ ವೇಳೆ ದಿಢೀರಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹಲವಾರು ಸಂಖ್ಯೆಯಲ್ಲಿ ಭಕ್ತರು ಮೂರ್ತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 50ಕ್ಕೂ ಹೆಚ್ಚು ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದೆ. 13 ಮಂದಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.