ನವದೆಹಲಿ, ಅ 07 (DaijiworldNews/DB): ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಳಿದ ಎಲ್ಲಾ ಮಾಹಿತಿಗಳಿಗೆ ಸಮರ್ಪಕ ಉತ್ತರ ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇಡಿ ಸಮನ್ಸ್ ಜಾರಿ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸಿದ ಬಳಿಕ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ನಮ್ಮ ಸಂಸ್ಥೆಗಳ ಕುರಿತು ದಾಖಲೆ ಪತ್ರಗಳನ್ನು ಅಧಿಕಾರಿಗಳು ಕೇಳಿದ್ದು, ಎಲ್ಲವನ್ನೂ ಶೀಘ್ರ ಸಲ್ಲಿಸುತ್ತೇನೆ. ನ್ಯಾಷನಲ್ ಹೆರಾಲ್ಡ್ ಸಂಬಂಧಿಸಿ ಯಾವುದೇ ಮಾಹಿತಿಯನ್ನು ಕೇಳಿಲ್ಲ ಎಂದರು.
ಇಡಿ ವಿಚಾರಣೆಗೆ ಹಾಜರಾಗಲು ಸೆಪ್ಟೆಂಬರ್ 23ರಂದು ಸಮನ್ಸ್ ನೀಡಿತ್ತಾದರೂ, ಭಾರತ್ ಜೋಡೋ ಯಾತ್ರೆ ಕಾರಣದಿಂದಾಗಿ ಸಮಯ ಕೇಳಿದ್ದೆವು. ಆದರೆ ಅಧಿಕಾರಿಗಳು ನಿರಾಕರಿಸಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಆಗಮಿಸಿದ್ದೇವೆ ಎಂದು ತಿಳಿಸಿದರು.
ಡಿ.ಕೆ. ಸಹೋದರರು ಸತತ ನಾಲ್ಕು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸಿದರು. ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗಿದ್ದು, ವಿಚಾರಣೆ ಮುಗಿದ ಬಳಿಕ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಇಡಿ ಕಚೇರಿಯಿಂದ ತೆರಳಿದರು.