ನವದೆಹಲಿ, ಅ 07 (DaijiworldNews/MS): ಇತ್ತೀಚೆಗೆ ನಡೆದ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ‘ಹಿಂದೂ ದೇವರಿಗೆ ಪ್ರಾರ್ಥಿಸಬೇಡಿ’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ರಾಜೇಂದ್ರ ಪಾಲ್ ಗೌತಮ್ ಹೇಳಿಕೆಯ ಕ್ಲಿಪ್ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿದ್ದು. ಸಚಿವರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ ಇದು ಆಪ್ ಹಾಗೂ ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ.
ಅ. 5 ರಂದು ಧರ್ಮಚಕ್ರ ಪ್ರವರ್ತನ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಹಿಂದೂಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಸಮಾರಂಭದಲ್ಲಿ ರಾಜೇಂದ್ರ ಪಾಲ್ ಗೌತಮ್ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿ ಬ್ರಹ್ಮ, ವಿಷ್ಣು, ಶಿವ, ರಾಮ, ಶ್ರೀ ಕೃಷ್ಣ, ಗೌರಿ ಮತ್ತು ಗಣಪತಿ ಅಥವಾ ಯಾವುದೇ ಹಿಂದೂ ದೇವರುಗಳ ಪೂಜೆಯನ್ನು ಮಾಡುವುದಿಲ್ಲ ಎಂದು ಪ್ರತಿಜ್ಞೆ ಸ್ವೀಕರಿಸಿರುವುದು ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.
ಈ ವಿಡಿಯೋ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜೇಂದ್ರ ಪಾಲ್ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.