ಕೋಲ್ಕತಾ, ಅ 10 (DaijiworldNews/DB): ಪಶ್ಚಿಮ ಬಂಗಾಳದ ಮೋಮಿನ್ ಪುರ ಪ್ರದೇಶದಲ್ಲಿ ಎರಡು ಕೋಮುಗಳ ನಡುವೆ ನಡೆದ ಘರ್ಷಣೆ ಇದೀಗ ಹಿಂಸಾಚಾರಕ್ಕೆ ತಿರುಗಿದ್ದು, ಕಿಡಿಗೇಡಿಗಳು ವಾಹನಗಳನ್ನು ಧ್ವಂಸಗೊಳಿಸಿ ಕಲ್ಲ ತೂರಾಟ ನಡೆಸಿದ್ದಾರೆ. ಪ್ರಕರಣ ಸಂಬಂಧ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.
ಇಕ್ಬಾಲ್ಪುರ್ ಪೊಲೀಸ್ ಠಾಣೆ ಸುತ್ತಮುತ್ತ ಭಾನುವಾರ ರಾತ್ರಿ ಭಾರೀ ಸಂಖ್ಯೆಯಲ್ಲಿ ಜನರು ಗುಂಪುಗೂಡಿದ್ದು, ಬಳಿಕ ಘರ್ಷಣೆ ನಡೆದಿದೆ ಎಂದು ತಿಳಿದು ಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅಮಿತ್ ಮಾಳವೀಯಾ, ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಬಂಗಾಳದಲ್ಲಿ ಕೋಮು ಗಲಭೆ ಸಾಮಾನ್ಯ ಎಂಬಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಗಳ ಮನೆ ಮೇಲೆ ದಾಳಿ ನಡೆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಟ್ವೀಟರ್ನಲ್ಲಿ ಆರೋಪಿಸಿದ್ದಾರೆ.