ಬೆಂಗಳೂರು, ಅ 11 (DaijiworldNews/SM): ಕಳೆದ 8 ವರ್ಷದಲ್ಲಿ ಗರಿಷ್ಠ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ನರೇಂದ್ರ ಮೋದಿಜಿ ಅವರ ಬಗ್ಗೆ ಸೋನಿಯಾ ಮತ್ತು ರಾಹುಲ್ ಗಾಂಧಿಯವರು ಹಗುರವಾಗಿ ಮಾತನಾಡುತ್ತಿದ್ದಾರೆ. ಇಂಥ ಹಗುರ ಮಾತನ್ನಾಡಿದ ಕಾಂಗ್ರೆಸ್ ಮುಖಂಡರು ಮತ್ತು ಆ ಪಕ್ಷವನ್ನು ದೇಶದ ಜನರು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಎಚ್ಚರಿಸಿದರು.
ರಾಯಚೂರು ಜಿಲ್ಲೆಯ ಗಿಲ್ಲೇಸುಗೂರಿನಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರ ಸಿಎಂ ಕನಸು ನನಸಾಗುವುದಿಲ್ಲ. ಸಿದ್ದರಾಮಯ್ಯರಿಗೆ 75 ಲಕ್ಷದ ವಾಚ್ ಯಾರು ಕೊಟ್ಟರು? ಸುಮ್ಮನೇ ಕೊಟ್ಟರೇ? ಇದಕ್ಕೆ ಉತ್ತರಿಸಿ ಎಂದು ಸವಾಲೆಸೆದರು. ಅರ್ಕಾವತಿ ರೀಡೂ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳನ್ನು ರಿಯಲ್ ಎಸ್ಟೇಟ್ ನವರಿಗೆ ಮಾರಾಟ ಮಾಡಿ ಅನುಕೂಲ ಮಾಡಿಕೊಂಡಿದ್ದರು ಎಂದು ಟೀಕಿಸಿದರು.