ನವದೆಹಲಿ, ಅ 13 (DaijiworldNews/DB): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎಐಸಿಸಿಯ ಎಲ್ಲಾ ಪದಾಧಿಕಾರಿಗಳು ತಮ್ಮ ತಮ್ಮ ತವರು ರಾಜ್ಯದಲ್ಲಿಯೇ ಮತ ಚಲಾಯಿಸಬೇಕು ಎಂದು ಕಾಂಗ್ರೆಸ್ನ ಕೇಂದ್ರ ಚುನಾವಣಾ ಪ್ರಾಧಿಕಾರವು ನಿರ್ದೇಶನ ನೀಡಿದೆ.
ಈ ಕುರಿತು ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ನಿರ್ದೇಶನ ಹೊರಡಿಸಿದ್ದು, ಎಲ್ಲಾ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು, ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳು ಪಕ್ಷದ ಅಧ್ಯಕ್ಷರ ಆಯ್ಕೆಗೆ ತಮ್ಮ ತಮ್ಮ ತವರು ರಾಜ್ಯದಲ್ಲಿಯೇ ಮತ ಚಲಾಯಿಸಬೇಕು ಎಂದು ಸೂಚಿಸಿದ್ದಾರೆ.
ಚುನಾವಣೆ ನಿಷ್ಪಕ್ಷಪಾತವಾಗಿ ನಡೆಯಲು ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ಈ ನಿರ್ದೇಶನ ನೀಡಲಾಗಿದೆ. ನಿಯೋಜಿತ ರಾಜ್ಯಗಳಲ್ಲಿ ಯಾರೂ ಮತ ಚಲಾಯಿಸುವಂತಿಲ್ಲ ಎಂದವರು ನಿರ್ದೇಶಿಸಿದ್ದಾರೆ.
ಅಕ್ಟೋಬರ್ 17ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ನೇರ ಹಣಾಹಣಿ ನಡೆಯಲಿದೆ. ಎಲ್ಲಾ ಪಿಸಿಸಿ ಪ್ರಧಾನ ಕಚೇರಿಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಲಿದೆ.
.